ಸರ್ಕಾರಿ ಭೂಮಿ ಒತ್ತುವರಿ ಆರೋಪ ! ಪ್ರಕರಣ ರದ್ದು ಗೊಳಿಸಿದ ಹೈಕೋರ್ಟ್
ಸರಕಾರಿ ಜಮೀನು ಒತ್ತುವರಿ ವಿಷಯಕ್ಕೆ ಸಂಬಂಧಿಸಿದಂತೆ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಬೆಂಗಳೂರು ಮೆಟ್ರೊ ಪಾಲಿಟನ್ ಟಾಸ್ಕ್ ಫೋರ್ಸ್ನಡಿ ಈ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನೆ ಮಾಡಿ ಹೈಕೋರ್ಟ್ಗೆ ಗುರೂಜಿ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕೇಸ್ ರದ್ದು ಮಾಡಿ ಆದೇಶ ನೀಡಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧ ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ಬೆಂಗಳೂರು ಮೆಟ್ರೊ ಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್ಐಆರ್ ಪ್ರಶ್ನಿಸಿ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪುರಸ್ಕರಿಸಿದೆ. ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ನ್ಯಾಯಾಲಯ, ಅರ್ಜಿ ಪುರಸ್ಕರಿಸಲಾಗಿದೆ. ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧದ ಪ್ರಕರಣ ರದ್ದುಪಡಿಸಲಾಗಿದೆ. ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವು ಬಿಎನ್ಎಸ್ಎಸ್ 528ರಡಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಿಗೆ ಆದೇಶ ಅನ್ವಯಿಸುವುದಿಲ್ಲ, ಎಂದು ಆದೇಶಿಸಿದೆ. ಆದೇಶದ ಪ್ರತಿ ಇನ್ನೂ ಬಿಡುಗಡೆಯಾಗಬೇಕಿದೆ.
ಇತರೆ ಸುದ್ದಿಗಳು